<p>ಮಂಡ್ಯ: ಕರ್ತವ್ಯದ ಸಮಯದಲ್ಲಿ ಹೃದಯಾಘಾತದಿಂದ ಮೃತಪಟ್ಟ ಯೋಧನಿಗೆ ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸುವ ಮೂಲಕ ಗೌರವ ಸಲ್ಲಿಸಲಾಯಿತು.</p><p>ಮಂಡ್ಯ ನಗರದ ತಾವರೆಗೆರೆ ಗ್ರಾಮ ನಿವಾಸಿ ಎಂ.ಬಿ. ಮಾದೇಗೌಡ (44) ಮೃತ ಯೋಧರು. ಇವರು ಗಡಿ ಭದ್ರತಾ ಪಡೆ (ಬಿ.ಎಸ್.ಎಫ್.) ಯೋಧನಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮಹಾರಾಷ್ಟ್ರ ರಾಜ್ಯದ ಚಾಕೋರು ಜಿಲ್ಲೆಯ ಲಾತೂರ್ನ ಬಿಎಸ್ಎಫ್ ತರಬೇತಿ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರು 2000ರಲ್ಲಿ ಮೈಸೂರಿನಲ್ಲಿ ನಡೆದ BSF ಸೇನಾ ನೇಮಕಾತಿ ರ್ಯಾಲಿಯಲ್ಲಿ ಆಯ್ಕೆಯಾಗಿ BSF ಸೇನೆಗೆ ಸೇರಿದ್ದರು. ಕಳೆದ 25 ವರ್ಷಗಳಲ್ಲಿ ದೇಶದ ಹಲವೆಡೆ ಸೇವೆ ಸಲ್ಲಿಸಿದ್ದರು.</p><p>ಜಿಲ್ಲಾ ಸಶಸ್ತ್ರ ಮೀಸಲು ಪಡೆ (ಡಿಎಆರ್) ಮೈದಾನದಲ್ಲಿ ಯೋಧನ ಮೃತ ದೇಹಕ್ಕೆ ಪುಷ್ಪಗುಚ್ಛ ಇರಿಸಿ ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ರವಿಕುಮಾರ್, ಜಿಲ್ಲಾಧಿಕಾರಿ ಡಾ. ಕುಮಾರ ಮತ್ತು ಜಿಲ್ಲಾ ಪೊಲೀಸ್ ಅಧೀಕ್ಷಕಿ ಶೋಭಾರಾಣಿ ಅವರು ಗೌರವ ನಮನವನ್ನು ಸಲ್ಲಿಸಿದರು. ನಂತರ ಮೃತ ದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಯಿತು. ಅಂತ್ಯಕ್ರಿಯೆಗೆ ಸಿದ್ಧತೆ ನಡೆಸಲಾಗುತ್ತಿದ್ದು, ಸಂಜೆ ಒಳಗೆ ಸರ್ಕಾರಿ ಗೌರವದೊಂದಿಗೆ ನೆರವೇರಲಿದೆ. </p><p>ಜಿಲ್ಲಾಡಳಿತದ ವತಿಯಿಂದ ಗೌರವ ಸಲ್ಲಿಸಿದ ನಂತರ ಮೃತ ಕುಟುಂಬಕ್ಕೆ ಶಾಸಕ ಗಣಿಗ ರವಿಕುಮಾರ್, ಡಿಸಿ ಡಾ. ಕುಮಾರ, ಎಸ್ಪಿ ಶೋಭಾರಾಣಿ ಅವರು ಸಾಂತ್ವನ ಹೇಳಿದರು. </p><p>ಇದನ್ನೂ ಓದಿ: ಸಿಕ್ಕ ನಿಧಿಗಿಂತ ಬಡ ಬಾಲಕನ ಪ್ರಾಮಾಣಿಕತೆಯೇ ದೊಡ್ಡದು: ಪ್ರಜ್ವಲ್ ರಿತ್ತಿ ಕುಟುಂಬ ಸನ್ಮಾನಿಸಿದ ಸಚಿವ ಹೆಚ್. ಕೆ. ಪಾಟೀಲ್</a></p>
