<p>ಮಂಡ್ಯ: ಕೆಆರ್ಎಸ್ ಜಲಾಶಯದಿಂದ ಮಂಡ್ಯ ಜಿಲ್ಲೆಯ ಎಲ್ಲಾ ನಾಲೆಗಳಿಗೆ ನೀರು ಹರಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು ನಗರದ ವೃತ್ತದಲ್ಲಿ ಅರೆಬೆತ್ತಲೆಯಾಗಿ ಬಾಯಿ ಬಡಿದುಕೊಂಡು ವಿನೂತನವಾಗಿ ಪ್ರತಿಭಟನೆ ನಡೆಸಿದರು.</p><p>ಒಣಗುತ್ತಿರುವ ಕಬ್ಬು ಮತ್ತು ಇತರ ಬೆಳೆಗಳಿಗೆ ಕೂಡಲೇ ನೀರು ಹರಿಸಬೇಕು. ಅಣೆಕಟ್ಟಿನಲ್ಲಿ 90 ಅಡಿ ನೀರಿದ್ದರೂ ನಾಲೆಗಳಿಗೆ ನೀರು ಹರಿಸಲು ಸರ್ಕಾರ ಮೀನಮೇಷ ಎಣಿಸುತ್ತಿದೆ. ರೈತರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಒಣಗಿದ ಕಬ್ಬು ಹಿಡಿದು ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ನಂತರ ರಸ್ತೆ ಸಂಚಾರಕ್ಕೆ ಅಡ್ಡಿಪಡಿಸಿ ಸ್ಥಳದಲ್ಲಿ ಅಡುಗೆ ತಯಾರಿಸಿ ಊಟ ಮಾಡಿದರು.</p><p>ಮತ್ತೊಂದೆಡೆ, ಜೆಡಿಎಸ್ ನಾಯಕರು ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಧರಣಿ ಕುಳಿತು ನೀರು ಬಿಡುಗಡೆಗೆ ಒತ್ತಾಯಿಸಿದರು. ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ ಹಾಗೂ ಮಾಜಿ ಸಚಿವ ಸಿ.ಎಸ್. ಪುಟ್ಟರಾಜು ನೇತೃತ್ವದಲ್ಲಿ ಧರಣಿ ಪ್ರತಿಭಟನೆ ನಡೆಯಿತು.</p><p>ಮಂಡ್ಯ ಜಿಲ್ಲೆಯಲ್ಲಿ ಬರದ ಛಾಯೆ ಇದೆ, ಒಣಗುತ್ತಿರುವ ಬೆಳೆಗೆ ನೀರು ಬಿಡದೆ ರಾಜ್ಯ ಸರ್ಕಾರ ನಿರ್ಲಕ್ಷ್ಯ ತೋರಿದೆ. ರೈತರು ಸಂಕಷ್ಟದ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಬರ ಎಂದು ಘೋಷಣೆ ಮಾಡತ್ತಿಲ್ಲ, ಅತ್ತ ನೀರು ಕೂಡ ಕೊಡ್ತಿಲ್ಲ, ರೈತರಿಗೆ ನಿರಂತರವಾಗಿ ಸರ್ಕಾರ ಅನ್ಯಾಯ ಮಾಡ್ತಿದೆ. ತಕ್ಷಣವೇ ನಾಲೆಗಳಿಗೆ ನೀರು ಬಿಡುಗಡೆ ಮಾಡಬೇಕು, ಇಲ್ಲದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.</p><p>ಪ್ರತಿಭಟನೆಯಲ್ಲಿ ಮಾಜಿ ಶಾಸಕ ಸುರೇಶ್ ಗೌಡ, ಜೆಡಿಎಸ್ ಜಿಲ್ಲಾಧ್ಯಕ್ಷ ಡಿ.ರಮೇಶ್ ಸೇರಿದಂತೆ ಇತರರಿದ್ದರು.</p><p>ಇದನ್ನೂ ಓದಿ: ಬಿಡದಿ ಟೌನ್ಶಿಪ್ ಯೋಜನೆಯ ಪರ, ವಿರೋಧ ಪ್ರತಿಭಟನೆ: ಎರಡೂ ಕಡೆಯವರ ನಡುವೆ ಮಾತಿನ ಚಕಮಕಿ</a></p>
